ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…

ಜಾನುವಾರು ಗಣತಿಯಲ್ಲಿ ರಾಜ್ಯಕ್ಕೆ ಪ್ರಥಮ

 ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.15: ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ, ಈ ಕಾರ್ಯಕ್ಕೆ ಕಾರಣರಾದ ಪಶು ವೈದ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತಾ ಜಾನುವಾರು ಸಾಕಾಣಿಕೆಯಲ್ಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜಿಲ್ಲೆ ಉತ್ತಮ ಹೆಸರು ಪಡೆಯಬೇಕು. ಹಾಗಾಗಿ ಪಶು ವೈದ್ಯಾಧಿಕಾರಿಗಳ ಸೇವೆ ಕೂಡ ಮುಖ್ಯ.

ರೈತರಿಗೆ ಜಾನುವಾರು ಸಾಕಾಣಿಕೆ ಕುರಿತಂತೆ ಮಾಹಿತಿ, ತರಬೇತಿ, ಕಾರ್ಯಾಗಾರಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ, ಪ್ರೊತ್ಸಾಹಧನ ಬಗ್ಗೆ ಮಾಹಿತಿ ನೀಡಿ, ಜಾನುವಾರುಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸಲು ಕಾಲಕಾಲಕ್ಕೆ ಲಸಿಕೆ ಹಾಕಿ ಎಂದರು.

ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೊಟ್ಟಿಗೆ ಗೊಬ್ಬರ ಬಳಸಿ ಪೌಷ್ಟಿಕ ಆಹಾರ ಉತ್ಪನ್ನ, ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಗುರಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹಕಾರ ಕೂಡ ಮುಖ್ಯ ಎಂದರು.

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಆವರಣಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರು ತೊಟ್ಟಿಗಳನ್ನ ಸ್ವಚ್ಚಗೊಳಿಸಿ ನೀರು ಹಾಯಿಸಿ. ಜಿಲ್ಲೆಯ ಯಾವುದೇ ಭಾಗದಿಂದ ಕೂಡ ಕುಡಿಯುವ ನೀರು ಸಮಸ್ಯೆ ಇದೆ ಎಂದು ಸಾರ್ವಜನಿಕರು ನನ್ನ ಬಳಿ ಮನವಿ ಮಾಡಬಾರದು. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.

2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ

ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು 21ನೇ ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95 ಸಾವಿರ ಮೇಕೆಗಳು ಜಿಲ್ಲೆಯಲ್ಲಿದೆ. 2,93,876 ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆಯನ್ನು ನೀಡಿದ್ದೇವೆ. ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯ ವನ್ನು ಎ ಪಿ ಎಲ್ ಪಡಿತರ ಚೀಟಿಗೆ 50% , ಬಿ ಪಿ ಎಲ್ ಪಡಿತರ ಚೀಟಿಗೆ 75% ನೀಡಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಜಗದೀಶ್ ಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರಿನಾಥ್ ಗೌಡ ಸೇರಿದಂತೆ ಜಿಲ್ಲೆಯ ಪಶುವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.