ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್

ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆ ನೀರು ಸಂಸ್ಕರಣಾ ಘಟಕಕ್ಕೆ ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, 38 ಕೆರೆಗಳಿಗೆ ಶೀಘ್ರದಲ್ಲೇ ಸಂಸ್ಕರಿಸಿದ ನೀರು ತುಂಬಿಸುವ ಕಾರ್ಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ಕಾಮಗಾರಿಗಳನ್ನ ಶೀಘ್ರ

ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎರಡನೇ ಹಂತದ ಸಂಸ್ಕರಿಸಿದ ನೀರು ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ದಾರಿ ಮಾಡಲಿದೆ. ಇದರಿಂದ ರೈತರಿಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವು:

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರ ರೈತ ಪರ ನಿಲುವನ್ನು ತೆಗೆದುಕೊಂಡಿದೆ. ರಾಜ್ಯ ಸರಕಾರ ತನ್ನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ದೆಹಲಿಯಲ್ಲೂ ಸಭೆ ನಡೆಸಿದ್ದಾರೆ. ಸರ್ವಪಕ್ಷಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಮಯವನ್ನು ಕೇಳಿದ್ದಾರೆ. ತಜ್ಞರು, ಹಿರಿಯ ಅಧಿಕಾರಿಗಳು ಮತ್ತು ಹಿರಿಯ ನ್ಯಾಯವಾದಿಗಳೊಂದಿಗೆ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ರಾಜ್ಯ ಸರಕಾರ ರೈತ ಪರ ನಿಲುವನ್ನು ತಗೆದುಕೊಳ್ಳುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರ. ರಾಜ್ಯ ಸರಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.