ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ

ವಿಜಯ ದರ್ಪಣ ನ್ಯೂಸ್….

ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ

ಬೆಂಗಳೂರು ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡಲು ಸಿದ್ಧರಾಗಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ ಕಣಕ್ಕೆ ಇಳಿಸೋಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಸೂಚಿಸಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು. ಎಲ್ಲಿಗೆ ಬೇಕಾದರೂ ಕರೆಯಿರಿ, ಬರುತ್ತೇನೆ. ನಿಮ್ಮ ಜತೆಯಲ್ಲಿ ಹೋರಾಟ ಮಾಡುತ್ತೇನೆ ಎಂದರು.

ಹಿಂದೆ ಇಪ್ಪತ್ತಮೂರು ಜಿಲ್ಲೆಗಳು ಇದ್ದವು. ಪ್ರತಿ ಜಿಲ್ಲೆ, ತಾಲ್ಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಕಷ್ಟಪಟ್ಟು ಪಕ್ಷ ಕಟ್ಟಿದ್ದೇನೆ. ಈಗಲೂ ಓಡಾಟ ಮಾಡುತ್ತಿದ್ದೇನೆ. ಪಕ್ಷ ಕಟ್ಟೋದು ಸುಲಭದ ಕೆಲಸವಲ್ಲ. ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ ಎಂದು ಮುಖಂಡರಿಗೆ ತಾಕೀತು ಮಾಡಿದರು.

ಯಾರೂ ಎದೆಗುಂದಬೇಕಿಲ್ಲ. ಪಕ್ಷ ಗಟ್ಟಿಗೊಳಿಸುವ ಕೆಲಸವನ್ನು ಮಾಡೋಣ. ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು. ಸಂಘಟನೆಯ ಬಗ್ಗೆ ಅಸಡ್ಡೆ ಬೇಡ ಎಂದು ಕಿವಿಮಾತು ಹೇಳಿದರು.

ಚುನಾವಣೆ ಹೊತ್ತಿನಲ್ಲಿ ಎಚ್ಚೆತ್ತುಕೊಳ್ಳಬೇಡಿ: ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ಶ್ರಮ ವ್ಯರ್ಥವಾಗುತ್ತದೆ ಎಂದರು.

ನಾಯಕನಾಗುವ ಕನಸು ಕಟ್ಟಿಕೊಂಡರೆ ಸಾಲದು. ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ. ನಿಮ್ಮ ಕ್ಷೇತ್ರ, ಮತಗಟ್ಟೆ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ. ಸದಸ್ಯತ್ವ ಅಭಿಯಾನವನ್ನು ವೇಗಯುತವಾಗಿ ನಡೆಸಬೇಕು. ಯುವಜನರು, ರೈತರು, ಕೃಷಿ ಕಾರ್ಮಿಕರು ಹೆಚ್ಚು ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆ ಆಗಬೇಕು ಎಂದರು.